
ಕ್ವೆಟ್ಟಾ, ಮೇ ೨೪- ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ರಾಜಧಾನಿ ಕ್ವೆಟ್ಟಾ ನಗರದ ಪ್ರಮುಖ ರೈಲ್ವೆ ನಿಲ್ದಾಣದ ಬಳಿ ಅತ್ಯಂತ ಭೀಕರ ಆತ್ಮಾಹುತಿ ಬಾಂಬ್ ಸ್ಫೋಟ ಸಂಭವಿಸಿ ಕನಿಷ್ಠ ೨೩ ಜನರು ಸ್ಥಳದಲ್ಲೇ ಮೃತಪಟ್ಟಿದ್ದು, ೪೭ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಲ್ಲಿನ ಭದ್ರತಾ ಅಧಿಕಾರಿಗಳು ಮತ್ತು ವೈದ್ಯಕೀಯ ಸಿಬ್ಬಂದಿ ಖಚಿತಪಡಿಸಿದ್ದಾರೆ. ರೈಲು ಹತ್ತಲು ನೂರಾರು ಪ್ರಯಾಣಿಕರು ಕಾಯುತ್ತಿದ್ದ ಸಂದರ್ಭದಲ್ಲೇ ಈ ಸ್ಫೋಟ ಸಂಭವಿಸಿದ್ದರಿಂದ ಸಾವಿನ ಸಂಖ್ಯೆ ಹೆಚ್ಚಾಗಿದೆ ಎನ್ನಲಾಗಿದೆ.
ಸ್ಫೋಟದ ತೀವ್ರತೆಗೆ ಇಡೀ ರೈಲ್ವೆ ನಿಲ್ದಾಣ ಮತ್ತು ಸುತ್ತಮುತ್ತಲಿನ ಪ್ರದೇಶಗಳು ಅಲುಗಾಡಿವೆ ಮತ್ತು ಕೆಲವು ವಾಹನಗಳು ಛಿದ್ರಗೊಂಡಿವೆ. ರೈಲ್ವೆ ಹಳಿಯ ಸಮೀಪ ನಿಲ್ಲಿಸಲಾಗಿದ್ದ ಸುಮಾರು ೧೦ಕ್ಕೂ ಹೆಚ್ಚು ವಾಹನಗಳು ಸ್ಫೋಟದ ತೀವ್ರತೆಗೆ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಸ್ಫೋಟದ ಸದ್ದು ಕೇಳುತ್ತಿದ್ದಂತೆ ಸ್ಥಳದಲ್ಲಿ ಮರಣಮೃದಂಗ ಸೃಷ್ಟಿಯಾಗಿದ್ದು, ಪ್ರಯಾಣಿಕರು ಪ್ರಾಣಭಯದಿಂದ ದಿಕ್ಕಾಪಾಲಾಗಿ ಓಡಿದ್ದಾರೆ. ಘಟನಾ ಸ್ಥಳದಲ್ಲಿ ರಕ್ತದ ಮಡುವು ಹಾಗೂ ದೇಹದ ಭಾಗಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ದೃಶ್ಯ ಅತ್ಯಂತ ಕರುಣಾಜನಕವಾಗಿದೆ.
ಆಸ್ಪತ್ರೆಯಲ್ಲಿ ತುರ್ತು ಪರಿಸ್ಥಿತಿ ಘೋಷಣೆ: ಘಟನೆ ನಡೆದ ತಕ್ಷಣವೇ ಸ್ಥಳೀಯ ಪೊಲೀಸರು ಮತ್ತು ರಕ್ಷಣಾ ಪಡೆಗಳು ಜಂಟಿ ಕಾರ್ಯಾಚರಣೆ ನಡೆಸಿ, ಗಾಯಾಳುಗಳನ್ನು ತಕ್ಷಣವೇ ಕ್ವೆಟ್ಟಾದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಗೊಂಡವರಲ್ಲಿ ಹಲವರ ಪರಿಸ್ಥಿತಿ ಅತ್ಯಂತ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಆತಂಕ ಎದುರಾಗಿದೆ. ಪರಿಸ್ಥಿತಿಯ ಗಂಭೀರತೆಯನ್ನು ಪರಿಗಣಿಸಿ ಕ್ವೆಟ್ಟಾ ಸರ್ಕಾರಿ ಆಸ್ಪತ್ರೆಯಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ರಜೆ ಮೇಲಿದ್ದ ವೈದ್ಯರು ಮತ್ತು ದಾದಿಯರನ್ನು ತಕ್ಷಣವೇ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.
ಬಲೂಚಿಸ್ತಾನ್ ಲಿಬರೇಶನ್ ಆರ್ಮಿ, ಸ್ಫೋಟದ ಹೊಣೆ ಈ ಭೀಕರ ದಾಳಿಯ ಹೊಣೆಯನ್ನು ನಿಷೇಧಿತ ಉಗ್ರಗಾಮಿ ಸಂಘಟನೆಯಾದ ‘ಬಲೂಚಿಸ್ತಾನ್ ಲಿಬರೇಶನ್ ಆರ್ಮಿ’ ವಹಿಸಿಕೊಂಡಿದೆ. ಅಲ್ಲಿನ ಇನ್ಫೆಂಟ್ರಿ ಶಾಲೆಯ ಸೇನಾ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ಈ ಆತ್ಮಾಹುತಿ ದಾಳಿ ನಡೆಸಲಾಗಿದೆ ಎಂದು ಸಂಘಟನೆ ಹೇಳಿಕೊಂಡಿದೆ.
ಮೃತರಲ್ಲಿ ಹೆಚ್ಚಿನವರು ರಜೆಯ ಮೇಲೆ ತಮ್ಮ ತವರಿಗೆ ಮರಳಲು ಸಿದ್ಧರಾಗಿದ್ದ ಪಾಕಿಸ್ತಾನಿ ಸೇನಾ ಸಿಬ್ಬಂದಿಯಾಗಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಖಂಡನೆ ಮತ್ತು ಹೈ ಅಲರ್ಟ್ ಪಾಕಿಸ್ತಾನದ ಪ್ರಧಾನಿ ಮತ್ತು ಬಲೂಚಿಸ್ತಾನ್ ಪ್ರಾಂತ್ಯದ ಮುಖ್ಯಮಂತ್ರಿಗಳು ಈ ಅಮಾನವೀಯ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ.
ಅಮಾಯಕರ ರಕ್ತ ಹರಿಸಿದ ಉಗ್ರರನ್ನು ಮಟ್ಟಹಾಕುವುದಾಗಿ ಅವರು ಶಪಥ ಮಾಡಿದ್ದಾರೆ. ಘಟನೆಯ ಬೆನ್ನಲ್ಲೇ ಇಡೀ ಕ್ವೆಟ್ಟಾ ನಗರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಪ್ರಮುಖ ರಸ್ತೆಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ದಾಳಿಕೋರರ ಪತ್ತೆಗಾಗಿ ತನಿಖಾ ಸಂಸ್ಥೆಗಳು ಜಾಲ ಬೀಸಿವೆ.
























