Home ಜಿಲ್ಲೆ ಮಂಗಳೂರು ಮುಂದಿನ ವರ್ಷ ಅಂಬೇಡ್ಕರ್ ಭವನದಲ್ಲಿಯೇ ಅಂಬೇಡ್ಕರ್ ಜಯಂತಿ ಆಚರಿಸುವಂತಾಗಬೇಕು- ಭಾಗೀರಥಿ ಮುರುಳ್ಯ

ಮುಂದಿನ ವರ್ಷ ಅಂಬೇಡ್ಕರ್ ಭವನದಲ್ಲಿಯೇ ಅಂಬೇಡ್ಕರ್ ಜಯಂತಿ ಆಚರಿಸುವಂತಾಗಬೇಕು- ಭಾಗೀರಥಿ ಮುರುಳ್ಯ

ಸುಳ್ಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ
ಸುಳ್ಯ:ಮುಂದಿನ ವರ್ಷ ಸುಳ್ಯದ ನೂತನ ಅಂಬೇಡ್ಕರ್ ಭವನದಲ್ಲಿ ಅಂಬೇಡ್ಕರ್ ಜಯಂತಿ ಆಚರಿಸಬೇಕು ಎಂದು ಕಳೆದ ವರ್ಷ ಅಂಬೇಡ್ಕರ್ ಜಯಂತಿ ದಿನ ಹೇಳಿದ್ದೆ, ಆದರೆ ಅಂಬೇಡ್ಕರ್ ಭವನ ಪೂರ್ತಿಯಾಗಿಲ್ಲ, ಮುಂದಿನ ವರ್ಷವಾದರೂ ಅಂಬೇಡ್ಕರ್ ಭವನದಲ್ಲಿ ಅಂಬೇಡ್ಕರ್ ಜಯಂತಿ ಆಚರಿಸುವಂತಾಗಬೇಕು, ಅದಕ್ಕಾಗಿ ಎಲ್ಲಾ ಪ್ರಯತ್ನ ನಡೆಸಲಾಗುವುದು ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದ್ದಾರೆ.
ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ನಗರ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೫ನೇ ಜನ್ಮ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ.ಮುಸ್ತಫ ಸಮಾರಂಭವನ್ನು ಉದ್ಘಾಟಿಸಿದರು. ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಸುಬ್ಬಪ್ಪ ಕೈಕಂಬ ಸಂಸ್ಮರಣಾ ಉಪನ್ಯಾಸ ನೀಡಿದರು. ದ.ಕ.ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ತಾಲೂಕು ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ತಹಶೀಲ್ದಾರ್ ಎಂ.ಮಂಜುಳ, ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ, ನ.ಪಂ. ಮುಖ್ಯಾಧಿಕಾರಿ ಹೆಚ್.ಆರ್. ಬಸವರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಎಸ್.ಹರಗಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕೃಷ್ಣ.ಬಿ ಸ್ವಾಗತಿಸಿ, ಶಿವಪ್ರಸಾದ್ ಕೆ.ವಿ.ವಂದಿಸಿದರು. ಮಮತಾ ಕೆ.ಎಸ್. ಹಾಗೂ ಆಶಾ ಕಾರ್ಯಕ್ರಮ ನಿರೂಪಿಸಿದರು.
ಸಮಾರಂಭದಲ್ಲಿ ದ್ವಿತೀಯ ಪಿಯುಸಿಯಲ್ಲಿ ಉನ್ನತ ಅಂಕ ಗಳಿಸಿದ ಪ.ಜಾ.ವಿಭಾಗದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.