
ಸಂಜೆವಾಣಿ ವಾರ್ತೆ
ಬಳ್ಳಾರಿ, ಮೇ 26: ನಗರದ ಬಾಪೂಜಿ ನಗರ ಪ್ರದೇಶದಲ್ಲಿ ರಸ್ತೆ ಅಗಲೀಕರಣ ಕಾಮಗಾರಿಯಿಂದ ಮನೆ ಕಳೆದುಕೊಂಡ ಸಂತ್ರಸ್ತ ಕುಟುಂಬಗಳ ಹೋರಾಟಕ್ಕೆ ಮಾಜಿ ಶಾಸಕ ಗಾಲಿ ಸೋಮಶೇಖರ ರೆಡ್ಡಿ ಬೆಂಬಲ ಸೂಚಿಸಿದರು.
ವಾರ್ಡ್ ನಂ. 7 ಮತ್ತು 8ಕ್ಕೆ ಸಂಪರ್ಕ ಹೊಂದಿರುವ ರಸ್ತೆ ಅಗಲೀಕರಣ ಕಾಮಗಾರಿಯ ವೇಳೆ ಕಳೆದ ವರ್ಷ ಇಪ್ಪತ್ತಕ್ಕೂ ಹೆಚ್ಚು ಕುಟುಂಬಗಳ ಮನೆಗಳನ್ನು ತೆರವುಗೊಳಿಸಲಾಗಿತ್ತು. ಆಗ ಸಂತ್ರಸ್ತರಿಗೆ ಪರ್ಯಾಯ ನಿವೇಶನ ಹಾಗೂ ವಸತಿ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಲಾಗಿತ್ತು ಎಂದು ಕುಟುಂಬಗಳು ಆರೋಪಿಸಿವೆ. ಆದರೆ ವರ್ಷ ಕಳೆದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಸಂತ್ರಸ್ತರು ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.
ಇಂದು ಧರಣಿ ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಶಾಸಕ ಗಾಲಿ ಸೋಮಶೇಖರ ರೆಡ್ಡಿ, ಸಂತ್ರಸ್ತ ಕುಟುಂಬಗಳ ಅಹವಾಲು ಆಲಿಸಿ ಅವರಿಗೆ ಬೆಂಬಲ ವ್ಯಕ್ತಪಡಿಸಿದರು. ರಸ್ತೆ ಅಗಲೀಕರಣದ ವೇಳೆ ಮನೆ ಕಳೆದುಕೊಂಡವರಿಗೆ ಪರ್ಯಾಯವಾಗಿ ಮನೆ ಹಾಗೂ ನಿವೇಶನ ನೀಡುವುದು ನ್ಯಾಯಸಮ್ಮತವಾದ ಬೇಡಿಕೆಯಾಗಿದೆ ಎಂದು ಹೇಳಿದರು.
ಡೆಮಾಲಿಶ್ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನೀಡಿದ ಭರವಸೆಗಳನ್ನು ಈಗ ಆಡಳಿತ ನಡೆಸುತ್ತಿರುವವರು ಈಡೇರಿಸಬೇಕು. ಇಲ್ಲವಾದರೆ ಜನರಿಗೆ ಮೋಸ ಮಾಡಿದಂತಾಗುತ್ತದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಈ ನಡುವೆ, ರಸ್ತೆ ಕಾಮಗಾರಿ ಆರಂಭಿಸುವ ಮೊದಲು ಸುರಕ್ಷಿತ ಮತ್ತು ಕಾನೂನುಬದ್ಧ ನಿವೇಶನ ಒದಗಿಸಬೇಕು. ಇಲ್ಲದಿದ್ದರೆ ಕಾಮಗಾರಿ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಸಂತ್ರಸ್ತ ಕುಟುಂಬಗಳು ಮತ್ತೊಮ್ಮೆ ಎಚ್ಚರಿಕೆ ನೀಡಿವೆ.























